ಕಡಬ ಟೈಮ್, ಕುಕ್ಕೆ ಸುಬ್ರಹ್ಮಣ್ಯ: ಭಾರತೀಯ ಚಿತ್ರರಂಗ ಕಂಡ ಅದ್ಭುತ ಗಾಯಕಿ, ಗೀತಸಾಹಿತಿ ಮತ್ತು ಸಂಗೀತ ನಿರ್ದೇಶಕಿ, ಸಾವಿರಾರು ಗೀತೆಗಳಿಗೆ ಧ್ವನಿಯಾಗಿರುವ ಹಿನ್ನೆಲೆ ಗಾಯಕಿ ಎಸ್.ಜಾನಕಿ ಅವರು ಫೆ.20 ರಂದು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಹಾಗೂ ಶ್ರೀ ಸಂಪುಟ ನರಸಿಂಹಸ್ವಾಮಿ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು.


ಎಸ್.ಜಾನಕಿ ಅವರಿಗೆ ದೇವಸ್ಥಾನದ ವತಿಯಿಂದ ಸಹಾಯಕ ಕಾರ್ಯನಿರ್ವಾಹಣಾಧಿಕಾರಿ ಯೇಸುರಾಜ್, ಸುಬ್ರಹ್ಮಣ್ಯದ ನಾಗರಿಕರ ಪರವಾಗಿ ಗ್ರಾಮ ಪಂಚಾಯಿತಿ ಸದಸ್ಯ ಹರೀಶ ಇಂಜಾಡಿ ಅವರು ಶಾಲು, ಪ್ರಸಾದ, ನೆನಪಿನ ಕಾಣಿಕೆ ನೀಡಿ ಗೌರವಿಸಿದರು. ಶಿಷ್ಟಾಚಾರ ವಿಭಾಗದ ಜಯರಾಮ ರಾವ್, ಯಜ್ಞೇಶ್ ಆಚಾರ್, ಮಹೇಶ್ ಸೇರಿದಂತೆ ಮತ್ತಿತರರು ಜೊತೆಗಿದ್ದರು.




ಜಾನಕಿಯಮ್ಮ ಎಂದೇ ಪ್ರಸಿದ್ದರಾಗಿರುವ ಎಸ್.ಜಾನಕಿ ಅವರು ಭಾರತದ ಬಹುತೇಕ ಎಲ್ಲಾ ಅಂದರೆ, ಕನ್ನಡ, ತಮಿಳು, ತೆಲುಗು, ಮಲಯಾಳಂ, ಒಡಿಯಾ, ಹಿಂದಿ, ತುಳು, ಬಡಗ, ಬಂಗಾಳಿ, ಉರ್ದು, ಪಂಜಾಬಿ, ಕೊಂಕಣಿ, ಮರಾಠಿ, ಸಿಂಧಿ ಮುಂತಾದ 12ಕ್ಕೂ ಹೆಚ್ಚಿನ ಭಾರತೀಯ ಭಾಷೆಗಳಲ್ಲಿ ಹಾಡಿದ್ದಾರೆ. ಮಾತ್ರವಲ್ಲದೆ, ಸಿಂಹಳ, ಜಪಾನಿ, ಲ್ಯಾಟಿನ್, ಅರೇಬಿಕ್ ಒಳಗೊಂಡಂತೆ ಇತರ ಭಾಷೆಗಳಲ್ಲಿ ಸೇರಿದಂತೆ ಸುಮಾರು 48 ಸಾವಿರಕ್ಕೂ ಹೆಚ್ಚಿನ ಹಾಡುಗಳನ್ನು ಹಾಡಿ ಜನಜನಿತವಾಗಿದ್ದಾರೆ. ಕನ್ನಡ ಮತ್ತು ಮಲಯಾಳಂ ಭಾಷೆಗಳಲ್ಲಿ ಕ್ರಮವಾಗಿ ಹೆಚ್ಚಿನ ಹಾಡುಗಳನ್ನು ಹಾಡಿದ್ದಾರೆ.

