ಕಡಬ ಟೈಮ್ (KADABA TIMES): ಪೆರಾಬೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಡೆದಿರುವ ಜಲ ಜೀವನ್ ಮಿಷನ್ ಕಾಮಗಾರಿ ಅಸಮರ್ಪಕವಾಗಿದ್ದು ಇದರ ಗುತ್ತಿಗೆದಾರರನ್ನು ಕಪ್ಪುಪಟ್ಟಿಗೆ ಸೇರಿಸುವಂತೆ ಪೆರಾಬೆ ಗ್ರಾಮ ಪಂಚಾಯತ್ ಸಾಮಾನ್ಯ ಸಭೆಯಲ್ಲಿ ಸದಸ್ಯರು ಆಗ್ರಹಿಸಿದ್ದಾರೆ.


ಸಭೆ ಗ್ರಾ.ಪಂ.ಅಧ್ಯಕ್ಷೆ ಸಂಧ್ಯಾ ಕೆ.ಅವರ ಅಧ್ಯಕ್ಷತೆಯಲ್ಲಿ ಗ್ರಾ.ಪಂ.ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಈ ವಿಚಾರ ಪ್ರಸ್ತಾಪವಾಗಿದ್ದು ಜಲಜೀವನ್ ಮಿಷನ್(ಜೆಜೆಎಂ) ಕಾಮಗಾರಿಯು ಕೆಲವು ಕಡೆಗಳಲ್ಲಿ ಅಸಮರ್ಪಕ ಕಾಮಗಾರಿ ನಡೆದಿರುವ ಬಗ್ಗೆ ಗ್ರಾಮಸ್ಥರಿಂದ ದೂರುಗಳು ಬರುತ್ತಿವೆ. ಆದ್ದರಿಂದ ಈ ಕಾಮಗಾರಿ ನಿರ್ವಹಿಸಿರುವ ಗುತ್ತಿಗೆದಾರರನ್ನು ಕಪ್ಪು ಪಟ್ಟಿಗೆ ಸೇರಿಸುವಂತೆ ಸದಸ್ಯರು ಆಗ್ರಹಿಸಿದರು. ಈ ಬಗ್ಗೆ ಮೇಲಾಧಿಕಾರಿಗಳಿಗೆ ಬರೆಯಲು ಸಭೆಯಲ್ಲಿ ನಿರ್ಣಯಿಸಲಾಯಿತು.


ಅನುದಾನಕ್ಕೆ ಶಾಸಕರಿಗೆ ಮನವಿಗೆ ನಿರ್ಣಯ: ಕಳೆದ ವರ್ಷ ಕುಂತೂರು ಸರಕಾರಿ ಹಿ.ಪ್ರಾ.ಶಾಲಾ ಕಟ್ಟಡ ಕುಸಿದು ಬಿದ್ದಿರುವುದರಿಂದ ಖಾಸಗಿ ಕಟ್ಟಡದಲ್ಲಿ ಶಾಲಾ ಚಟುವಟಿಕೆ ನಡೆಯುತ್ತಿದೆ. ಹೊಸ ಕಟ್ಟಡದ ಕಾಮಗಾರಿ ಇನ್ನೂ ಆರಂಭವಾಗಿಲ್ಲ. ಕಟ್ಟಡಕ್ಕೆ ಹೆಚ್ಚಿನ ಅನುದಾನ ನೀಡುವಂತೆ ಶಾಸಕರಿಗೆ ಮನವಿ ಮಾಡಲು ಸಭೆಯಲ್ಲಿ ನಿರ್ಣಯಿಸಲಾಯಿತು.


ವ್ಯಾಪಾರ ಪರವಾನಿಗೆ ನವೀಕರಿಸಿ: ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ವ್ಯಾಪಾರ ಪರವಾನಿಗೆ ನವೀಕರಣ ಮಾಡದೇ ಇರುವ ವರ್ತಕರಿಗೆ ನೋಟಿಸ್ ನೀಡುವುದೆಂದು ಸಭೆಯಲ್ಲಿ ನಿರ್ಣಯಿಸಲಾಯಿತು. ಸಾರ್ವಜನಿಕರಿಗೆ ತೊಂದರೆಯಾಗುತ್ತಿರುವುದರಿಂದ ಗ್ರಾಮ ಪಂಚಾಯತ್ ವ್ಯಾಪ್ತಿಯ ಬಸ್ಸು ತಂಗುದಾಣಗಳ ಎದುರುಗಡೆ ಯಾವುದೇ ಖಾಸಗಿ ವಾಹನಗಳನ್ನು ಪಾರ್ಕಿಂಗ್ ಮಾಡಬಾರದು ಎಂದು ಬೋರ್ಡು ಅಳವಡಿಸುವುದೆಂದು ನಿರ್ಣಯಿಸಲಾಯಿತು.
ಗ್ರಾಮಸಭೆ ನಿರ್ಣಯಗಳಿಗೆ ಸ್ಪಂದನೆ ಇಲ್ಲ: ಗ್ರಾಮ ಸಭೆಯಲ್ಲಿ ಕೈಗೊಂಡ ನಿರ್ಣಯಗಳನ್ನು ಸಂಬಂಧಪಟ್ಟ ಇಲಾಖೆಗಳಿಗೆ ಕಳುಹಿಸಿದ್ದರೂ ಆ ಇಲಾಖೆಗಳಿಂದ ಯಾವುದೇ ಸ್ಪಂದನೆ ನೀಡದಿರುವ ಬಗ್ಗೆಯೂ ಸಭೆಯಲ್ಲಿ ಸದಸ್ಯರು ಅಸಮಾಧಾನ ವ್ಯಕ್ತಪಡಿಸಿದರು. ಈ ಬಗ್ಗೆ ಮೇಲಾಧಿಕಾರಿಗಳಿಗೆ ಬರೆದುಕೊಳ್ಳುವುದೆಂದು ನಿರ್ಣಯಿಸಲಾಯಿತು.


ಸಭೆಯಲ್ಲಿ ಉಪಾಧ್ಯಕ್ಷೆ ವೇದಾವತಿ, ಸದಸ್ಯರಾದ ಬಿ.ಕೆ.ಕುಮಾರ, ಸದಾನಂದ ಕುಂಟ್ಯಾನ, ಪಿ.ಜಿ ರಾಜು, ಕೃಷ್ಣ ವೈ, ಸುಶೀಲ, ಫಯಾಝ್ ಸಿ. ಎಂ., ಮೋಹಿನಿ, ಮಮತ, ಕಾವೇರಿ, ಲೀಲಾವತಿ, ಮೇನ್ಸಿ ಉಪಸ್ಥಿತರಿದ್ದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶಾಲಿನಿ ಕೆ.ಬಿ., ಸ್ವಾಗತಿಸಿ, ಸರಕಾರದ ಸುತ್ತೋಲೆ, ಸಾರ್ವಜನಿಕ ಅರ್ಜಿಗಳನ್ನು ಸಭೆಗೆ ಮಂಡಿಸಿದರು.